ವರ್ಷದಲ್ಲಿ ಮೊದಲ ಹಾಗೂ ಕೊನೆಯ ಜಾತ್ರೋತ್ಸವ ನಡೆಯುವ ಕ್ಷೇತ್ರ ಎಂಬ ವಿಶೇಷತೆಯನ್ನು ಹೊಂದಿರುವ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಜಾತ್ರೆಯು ಮೇ.25ರಂದು ಶ್ರದ್ಧಾಭಕ್ತಿಯಿಂದ ನೆರವೇರಿತು.
ಮೇ.24ರಂದು ಬಲಿವಾಡು ಶೇಖರಣೆ ನಡೆಯಿತು. ಮೇ.25ರಂದು ಬೆಳಿಗ್ಗೆ ನವಕ ಕಲಶಾಭಿಷೇಕ, ತುಲಾಭಾರ ಸೇವೆ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಭಜನೆ ಮತ್ತು ಮಹಾಪೂಜೆಯ ಬಳಿಕ ಶ್ರೀ ದೇವರ ಉತ್ಸವ ಬಲಿ, ಬಟ್ಟಲು ಕಾಣಿಕೆ ಹಾಗೂ ರಾಜಾಂಗಣದಲ್ಲಿ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಜರಗಿತು. ಮಧ್ಯಾಹ್ನ ಹಾಗೂ ರಾತ್ರಿ ಸೇರಿ 2 ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು, ಅಭಿವೃದ್ಧಿ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಪ್ರಧಾನ ಕಾರ್ಯದರ್ಶಿ ವಸಂತಕೃಷ್ಣ ಕೋನಡ್ಕ, ಸಂಚಾಲಕ ವೇ.ಮೂ. ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ, ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಪರವೂರ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.